ಬ್ರೇಕಿಂಗ್ : AAP ಗೆ ಗುಡ್ ಬೈ, BJP ಗೆ ಜೈ ಜೈ ಭಾಸ್ಕರ್ ರಾವ್ ಬಿಜೆಪಿಗೆ ಸೇರ್ಪಡೆ

ಬೆಂಗಳೂರು: ಮಾಜಿ ಐಪಿಎಸ್ ಅಧಿಕಾರಿ ಹಾಗೂ ಆಮ್ ಆದ್ಮಿ ಪಕ್ಷದ ಮುಖಂಡ ಭಾಸ್ಕರ್ ರಾವ್ ಇಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.
ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಪಕ್ಷದ ಕಚೇರಿಯಲ್ಲಿ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಭಾಸ್ಕರ್ ರಾವ್ ಬಿಜೆಪಿಗೆ ಸೇರಿದ್ದಾರೆ.
ನಿನ್ನೆ ( ಮಂಗಳವಾರ) ಅವರು ಕಂದಾಯ ಸಚಿವ ಆರ್.ಅಶೋಕ ಅವರನ್ನು ಭೇಟಿ ಮಾಡಿದ್ದರು. ಬಳಿಕ ಅವರು ಬಿಜೆಪಿ ಕಚೇರಿಯಲ್ಲಿ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಅಣ್ಣಾಮಲೈ ಸೇರಿ ಹಲವು ನಾಯಕರ ಜತೆ ಮಾತುಕತೆ ನಡೆಸಿದರು.
ಇನ್ನು ರಾಜಕೀಯ ಪಕ್ಷ ಸೇರಿ ಚುನಾವಣೆ ಸ್ಪರ್ಧಿಸುವ ಉದ್ದೇಶದಿಂದ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು. ರಾಜೀನಾಮೆ ಸ್ವೀಕಾರಗೊಂಡ ಬಳಿಕ ಅವರು ಆಮ್ ಆದ್ಮಿ ಪಕ್ಷ ಸೇರಿದ್ದರು. ಬಸವನಗುಡಿಯಿಂದ ಸ್ಪರ್ಧಿಸುವ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ್ದರು. ಆರಂಭದಲ್ಲಿ ಅವರು ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷವನ್ನು ಟೀಕಿಸುತ್ತಿದ್ದರು ಮತ್ತು ಪಕ್ಷದಲ್ಲೂ ಸಕ್ರಿಯರಾಗಿದ್ದರು. ಆದರೆ ಕಳೆದ ಒಂದೆರಡು ತಿಂಗಳಿಂದ ಅವರು ಪಕ್ಷದಲ್ಲಿ ಅಷ್ಟಾಗಿ ಸಕ್ರಿಯರಾಗಿರಲಿಲ್ಲ.