ಕರುನಾಡಿಗೆ ಮತ್ತೆ ಕಾವೇರಿ ಶಾಕ್ - ತಮಿಳುನಾಡಿಗೆ ನೀರು ಹರಿಸುವಂತೆ CWRC ಆದೇಶ

ಕರುನಾಡಿಗೆ ಮತ್ತೆ ಕಾವೇರಿ ಶಾಕ್ - ತಮಿಳುನಾಡಿಗೆ ನೀರು ಹರಿಸುವಂತೆ CWRC ಆದೇಶ
ಕರ್ನಾಟಕ ರಾಜ್ಯದಲ್ಲಿ ತೀವ್ರ ಬರಗಾಲ ಉಂಟಾಗಿ ನೀರಿಲ್ಲದೇ ರೈತರು ಗೋಳಾಡುತ್ತಿದ್ದಾರೆ. ಬರದ ನಡುವೆಯೂ ಕಾವೇರಿ ಕೊಳ್ಳದ ರೈತರು ಹಾಗೂ ಸಾರ್ವಜನಿಕರಿಗೆ ಹೊರೆಯಾಗುವಂತೆ ಕರ್ನಾಟಕದಿಂದ ಕಾವೇರಿ ನೀರು ನಿಯಂತ್ರಣಾ ಸಮಿತಿ (CWRC) ಆದೇಶ ಹೊರಡಿಸಿದೆ.
ನವದೆಹಲಿಯಲ್ಲಿ ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ಕಾವೇರಿ ನೀರು ನಿಯಂತ್ರಣಾ ಸಮಿತಿ ನಡೆಸಿದ ಸಭೆಯಲ್ಲಿ ಕರ್ನಾಟಕದ ಅಧಿಕಾರಿಗಳು ಆನ್ಲೈನ್ ಮೂಲಕ ಸಭೆಯಲ್ಲಿ ಭಾಗವಹಿಸಿದ್ದರು. ಕರ್ನಾಟಕ ಹಾಗೂ ತಮಿಳುನಾಡು ವಾದವನ್ನು ಆಲಿಸಿದ ಸಿಡಬ್ಲ್ಯೂಆರ್ಸಿ ಕರ್ನಾಟಕದ ಕಾವೇರಿ ನದಿಯಿಂದ ಮುಂದಿನ 15 ದಿನಗಳ ಕಾಲ ಪ್ರತಿದಿನ 2,6000 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸುವಂತೆ ಆದೇಶ ನೀಡಿದೆ.
ಕಾವೇರಿ ನದಿ ನೀರು ಹಂಚಿಕೆ ವಿವಾದ ಬಗೆಹರಿಸಲು ಸುಪ್ರೀಂ ಕೋರ್ಟ್ ಆದೇಶದಂತೆ ರಚಿಸಲಾದ ಕಾವೇರಿ ನೀರು ನಿಯಂತ್ರಣಾ ಸಮಿತಿ ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದಿಂದ ಪ್ರತಿ 15 ದಿನಗಳಿಗೊಮ್ಮೆ ಸಭೆಯನ್ನು ನಡೆಸಿ ನೀರು ಬಿಡುವ ವಿಚಾರಕ್ಕೆ ಕರ್ನಾಟಕಕ್ಕೆ ಆದೇಶ ನೀಡಲಾಗುತ್ತಿದೆ.
ಕರ್ನಾಟಕದಲ್ಲಿ ತೀವ್ರ ಬರಗಾಲ ಆವರಿಸಿದ್ದು ಕುಡಿಯುವ ನೀರಿಗೂ ಹಾಹಾಕಾರ ಶುರುವಾಗಿದೆ. ಆದರೂ, ಕೂಡ ಕನ್ನಡಿಗರಿಗೆ ಕಾವೇರಿ ನದಿ ನೀರು ಹಂಚಿಕೆಯಲ್ಲಿ ಅನ್ಯಾಯವಾಗುತ್ತಿದೆ. ಬರಗಾಲದ ನಡುವೆಯೂ ಕಳೆದೊಂದು ತಿಂಗಳ ಹಿಂದೆ ತಲಾ 5,000 ಕ್ಯೂಸೆಕ್ ನೀರು ಹರಿಸುವಂತೆ ಆದೇಶ ನೀಡಲಾಗಿತ್ತು. ಇದನ್ನು 3,000 ಕ್ಯೂಸೆಕ್ಗೆ ತಗ್ಗಿಸಲಾಗಿತ್ತು. ಈಗ ಮತ್ತಷ್ಟು ನೀರನ್ನು ತಗ್ಗಿಸಿ ಪ್ರತಿದಿನ 2,600 ಕ್ಯೂಸೆಕ್ ನೀರನ್ನು ಹರಿಸುವಂತೆ ಸಿಡಬ್ಲ್ಯೂಆರ್ಸಿ ಶಿಫಾರಸು ಮಾಡಿವೆ.