ಕೋವಿಡ್ ಹಿನ್ನೆಲೆ: ಆಸ್ಪತ್ರೆಗಳಲ್ಲಿ ಔಷಧಿ, ಸಿಬ್ಬಂದಿ ಸೇರಿದಂತೆ ಅಗತ್ಯ ಸಿದ್ಧತೆ ಇರಲಿ-ಡಿಸಿ

ಕೋವಿಡ್ ಹಿನ್ನೆಲೆ: ಆಸ್ಪತ್ರೆಗಳಲ್ಲಿ ಔಷಧಿ, ಸಿಬ್ಬಂದಿ ಸೇರಿದಂತೆ ಅಗತ್ಯ ಸಿದ್ಧತೆ ಇರಲಿ-ಡಿಸಿ

ಧಾರವಾಡ: ಕೋವಿಡ್ ಹೊಸ ರೂಪಾಂತರಿ ತಳಿ ಬಗ್ಗೆ ಹೆಚ್ಚಿನ ಭಯ ಬೇಡ. ಜನಸಾಮಾನ್ಯರಲ್ಲಿ ಕೋವಿಡ್ ಸುರಕ್ಷತಾ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಲು ಅಗತ್ಯ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಮತ್ತು ಕೋವಿಡ್ ಪರೀಕ್ಷೆ, ನಿಯಂತ್ರಣಕ್ಕೆ ಅಗತ್ಯ ಸಿಬ್ಬಂದಿ ಸಿದ್ಧತೆ, ಔಷಧಿಗಳ ದಾಸ್ತಾನು ಇರುವಂತೆ ಮುಂಜಾಗೃತೆ ವಹಿಸಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಹೇಳಿದರು. 

ಧಾರವಾಡ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆರೋಗ್ಯ ಇಲಾಖೆ, ಮಹಾನಗರ ಪಾಲಿಕೆ, ಪೊಲೀಸ್ ಮತ್ತು ಇತರ ಇಲಾಖೆಗಳ ಅಧಿಕಾರಿಗಳ ಸಭೆ ಜರುಗಿಸಿ ಕೋವಿಡ್ ನಿಯಂತ್ರಣಕ್ಕಾಗಿ ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳುವ ಕುರಿತು ಸಭೆ ಜರುಗಿಸಿ ಅವರು ಮಾತನಾಡಿದರು. 

ಕೋವಿಡ್ ಹೊಸ ರೂಪಾಂತರಿ ತಳಿಯ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಆತಂಕ, ಭಯ ಬೇಡ. ಈಗಾಗಲೇ ರಾಜ್ಯ ಸರ್ಕಾರ ನೀಡಿರುವ ಮಾರ್ಗಸೂಚಿಗಳನ್ನು ಮತ್ತು ಸಲಹಾತ್ಮಕ ಕ್ರಮಗಳನ್ನು ಪಾಲಿಸುವ ಮೂಲಕ ಜಾಗೃತಿ ವಹಿಸಬೇಕು. ಧಾರವಾಡ ಜಿಲ್ಲೆಯಲ್ಲಿ ಕಳೆದ ಕೋವಿಡ್ ಅವಧಿಯಲ್ಲಿ ಅನುಸರಿಸಿದ ಸೂಕ್ತ ಕ್ರಮಗಳನ್ನು ಆರೋಗ್ಯ ಇಲಾಖೆಯಿಂದ ಕೈಗೊಳ್ಳಲಾಗುವುದು. ಹಿಂದಿನ ಕೋವೀಡ್ ಸಂದರ್ಭದಲ್ಲಿ ರಚಿಸಿದ ಸಮಿತಿಗಳನ್ನು ಪುನರ್ ಸಿದ್ಧಗೊಳಸಿ, ಅಗತ್ಯವಿದ್ದಲ್ಲಿ ಸಮಿತಿಗಳಿಗೆ ಕಾರ್ಯ ಹಂಚಿಕೆ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು. 

ರಾಜ್ಯ ಆರೋಗ್ಯ ಇಲಾಖೆಯಿಂದ ಕಾಲ ಕಾಲಕ್ಕೆ ನೀಡುವ ಮಾರ್ಗಸೂಚಿಗಳನ್ನು ಪಾಲಿಸಬೇಕು. ಆರೋಗ್ಯ ಇಲಾಖೆಯೊಂದಿಗೆ ಇತರ ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡಬೇಕೇಂದು ಅವರು ಹೇಳಿದರು. 

ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಶಶಿಪಾಟೀಲ ಅವರು ಮಾತನಾಡಿ, ಜಿಲ್ಲೆಯಲ್ಲಿ ಕೋವಿಡ್ ಪರೀಕ್ಷೆ ಮತ್ತು ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳನ್ನು ಸಭೆಯಲ್ಲಿ ವಿವರಿಸಿದರು. 

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕಿ ರೇಖಾ ಡೊಳ್ಳಿನ, ಜಿಲ್ಲಾಶಸ್ತ್ರ ಚಿಕಿತ್ಸಕ ಡಾ.ಸಂಗಪ್ಪ ಗಾಬಿ, ಕಿಮ್ಸ್ ವೈದ್ಯಕೀಯ ಅಧೀಕ್ಷಕ ಡಾ.ಸಿ.ಅರುಣಕುಮಾರ ಸೇರಿದಂತೆ ವಿವಿಧ ತಾಲ್ಲೂಕು ಆಸ್ಪತ್ರೆಗಳ ವೈದ್ಯಾಧಿಕಾರಿಗಳು, ವಿವಿಧ ಇಲಾಖೆ ಅಧಿಕಾರಿಗಳು, ಜಿಲ್ಲಾ ಆರೋಗ್ಯ ಇಲಾಖೆಯ ಕಾರ್ಯಕ್ರಮದ ಅಧಿಕಾರಿಗಳು ಭಾಗವಹಿಸಿದ್ದರು.