ಧಾರವಾಡ: ಎಲ್ಲರೂ ಸ್ವಯಂಪ್ರೇರಣೆಯಿಂದ ಮಾಸ್ಕ್ ಧರಿಸಲಿ; ಡಿಸಿ

ಧಾರವಾಡ: ಎಲ್ಲರೂ ಸ್ವಯಂಪ್ರೇರಣೆಯಿಂದ ಮಾಸ್ಕ್ ಧರಿಸಲಿ; ಡಿಸಿ

ಧಾರವಾಡ: ಕೋವಿಡ್-19ರ ನಾಲ್ಕನೇ ಅಲೆಯ ಸಂಭಾವ್ಯತೆ ಹಿನ್ನೆಲೆಯಲ್ಲಿ ಸಾರ್ವಜನಿಕರು ಸೇರಿದಂತೆ ಎಲ್ಲರೂ ಸ್ವಯಂಪ್ರೇರಣೆಯಿಂದ ಮಾಸ್ಕ್‌ಗಳನ್ನು ಧರಿಸಬೇಕು ಮತ್ತು ಆರೋಗ್ಯ ಇಲಾಖೆಯೊಂದಿಗೆ ಉಳಿದ ಇಲಾಖೆಗಳು ಸಮನ್ವಯ ಸಾಧಿಸಿ ಕೋವಿಡ್ ನಿಯಂತ್ರಣಕ್ಕೆ ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದ್ದಾರೆ. 

ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಜರುಗಿದ ಕೋವಿಡ್-19 ರ ನಿಯಂತ್ರಣದ ಕುರಿತು ಜಿಲ್ಲಾಮಟ್ಟದ ಆರೋಗ್ಯಪಡೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

ಜಿಲ್ಲೆಯ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸರ್ಕಾರಿ ಆಸ್ಪತ್ರೆಗಳ ಅನುಗುಣವಾಗಿ ನಿಗದಿತ ಕೋವಿಡ್ ಪರೀಕ್ಷೆಗಳನ್ನು ಮಾಡಬೇಕು. ಹಿಂದಿನಂತೆ ಕೋವಿಡ್ ನಿಯಂತ್ರಣಕ್ಕಾಗಿ ಸಿದ್ಧಪಡಿಸಿದ್ದ ಮೂಲಸೌಕರ್ಯಗಳನ್ನು ಹಾಗೂ ಆಸ್ಪತ್ರೆ, ಕೋವಿಡ್ ಕೇರ್ ಸೆಂಟರ್‌ಗಳನ್ನು ತಕ್ಷಣ ಬಳಕೆಗೆ ಅನುವಾಗುವಂತೆ ಸಿದ್ಧಪಡಿಸಿಕೊಳ್ಳಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು. 

ಕೋವಿಡ್ ಕೇರ್ ಸೆಂಟರ್‌ಗಳನ್ನು ತಾಲೂಕಿಗೆ ಒಂದರಂತೆ ಹಾಗೂ ಅವಳಿನಗರದಲ್ಲಿ ಆರಂಭಿಸಲು ಆರೋಗ್ಯ ಇಲಾಖೆ ಅಗತ್ಯ ಮುಂಜಾಗೃತೆ ವಹಿಸಬೇಕು. ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಅಗತ್ಯ ಬೆಡ್, ಐಸಿಯು ಬೆಡ್, ಆಕ್ಸಿಜನ್ ಸೌಲಭ್ಯ ಸೇರಿದಂತೆ ಎಲ್ಲ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚಿಸಿದರು.