ನವದೆಹಲಿ : ''ಕಳಸಾ ಬಂಡೂರಿ ಯೋಜನೆಗೆ ಅನುಮತಿ ನೀಡಿ'' - ಕೇಂದ್ರದ ಅರಣ್ಯ ಸಚಿವರಿಗೆ ಡಿಸಿಎಂ ಡಿಕೆಶಿ ಮನವಿ

ನವದೆಹಲಿ : ''ಕಳಸಾ ಬಂಡೂರಿ ಯೋಜನೆಗೆ ಅನುಮತಿ ನೀಡಿ'' - ಕೇಂದ್ರದ ಅರಣ್ಯ ಸಚಿವರಿಗೆ ಡಿಸಿಎಂ ಡಿಕೆಶಿ ಮನವಿ

ನವದೆಹಲಿ : ಕಳಸಾ ಬಂಡೂರಿ ನಾಲೆ ಯೋಜನೆ ವಿಚಾರದಲ್ಲಿ ಕೇಂದ್ರ ಸಚಿವರು ಮಧ್ಯಪ್ರವೇಶ ಮಾಡಿ ಅಗತ್ಯವಿರುವ ಅರಣ್ಯ ಹಾಗೂ ವನ್ಯಜೀವಿ ಮಂಡಳಿ ಅನುಮತಿ ಕೊಡಿಸಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೇಂದ್ರ ಅರಣ್ಯ ಸಚಿವ ಭೂಪೇಂದರ್ ಯಾದವ್ ಗೆ ಮನವಿ ಮಾಡಿದ್ದಾರೆ. 

ನವದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದ ಡಿಕೆ ಶಿವಕುಮಾರ್ , ದಿನಾಂಕ 09-10-2024ರಂದು ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿಯು ತನ್ನ 80ನೇ ಸಭೆಯಲ್ಲಿ ಕರ್ನಾಟಕದ ಅರ್ಜಿ ವಿಚಾರಣೆಯನ್ನು ಮುಂದೂಡಿ ಈ ವಿಚಾರವಾಗಿ ಇರುವ ಕಾನೂನು ಸಮಸ್ಯೆಗಳ ಬಗ್ಗೆ ಸ್ಪಷ್ಟನೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿತ್ತು. ರಾಜ್ಯವು ದಿನಾಂಕ 10-10-2024 ಹಾಗೂ 16-10-2024 ದಿನಾಂಕದಂದು ಅಗತ್ಯ ಸ್ಪಷ್ಟನೆಯನ್ನು ಪತ್ರದ ಮೂಲಕ ಸಲ್ಲಿಕೆ ಮಾಡಲಾಗಿದೆ. 

ಕಳಸಾ ನಾಲೆ ಯೋಜನೆಗೆ ಕಾಳಿ ಹಾಗೂ ಸಹ್ಯಾದ್ರಿ ಹುಲಿ ಸಂರಕ್ಷಣಾ ಪ್ರದೇಶದಲ್ಲಿ 10.6852 ಹೆಕ್ಟೇರ್ ಅರಣ್ಯ ಭೂಮಿ ಅಗತ್ಯವಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಕಣಕುಂಬಿ ಸುತ್ತಲಿನ ಹಳ್ಳಿಗಳ ಪ್ರದೇಶವನ್ನು ಇದು ಹೊಂದಿದೆ. ಇದರಲ್ಲಿ ಜಾಕ್ ವೆಲ್ ಸಹಿತ ಪಂಪ್ ಹೌಸ್, ವಿದ್ಯುತ್ ಉಪಕೇಂದ್ರಗಳನ್ನು ನಿರ್ಮಾಣ ಮಾಡಲಾಗುವುದು. 

ಈ ಎಲ್ಲಾ ವಿಚಾರವಾಗಿ ಕರ್ನಾಟಕ ಸರ್ಕಾರದ ಅರಣ್ಯ ಮತ್ತು ಪರಿಸರ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು ಸ್ಪಷ್ಟನೆ ನೀಡಿದ್ದು, ಸುಪ್ರೀಂ ಕೋರ್ಟ್ ಈ ಯೋಜನೆ ಜಾರಿ ವಿಚಾರದಲ್ಲಿ ಕರ್ನಾಟಕ ರಾಜ್ಯಕ್ಕೆ ಯಾವುದೇ ಆಕ್ಷೇಪ ವ್ಯಕ್ತಪಡಿಸಿಲ್ಲ. ಇದರ ಜತೆಗೆ ಕಾನೂನು ಪ್ರಕಾರವಾಗಿ ಕೇಂದ್ರ ಸರ್ಕಾರದ ಎಲ್ಲಾ ಅನುಮತಿಗಳು ಸಿಕ್ಕ ನಂತರವಷ್ಟೇ ಈ ಯೋಜನೆ ಕಾಮಗಾರಿ ಕೈಗೊಳ್ಳಲು ನಿರ್ಧರಿಸಿದೆ ಎಂದು ತಿಳಿಸಿದರು. 

ಈ ಯೋಜನೆಯು ಅಭಯಾರಣ್ಯದ ಭಾಗವಲ್ಲದಿದ್ದರೂ ಹುಲಿ ಕಾರಿಡಾರ್ ಪ್ರದೇಶ ವ್ಯಾಪ್ತಿಯಲ್ಲಿ ಬರುತ್ತದೆ. ಈ ಯೋಜನೆಯಲ್ಲಿ ನಿರ್ಮಿಸಲಾಗುವ ಜಲ ಮೂಲಗಳು ವನ್ಯಜೀವಿಗೆ ಅಗತ್ಯ ನೀರು ಪೂರೈಸಲಿದೆ. ಹೀಗಾಗಿ ಈ ಯೋಜನೆಗೆ ಅನುಮತಿ ನೀಡಬೇಕು ಎಂದು ಕರ್ನಾಟಕದ ವನ್ಯಜೀವಿ ಸಂರಕ್ಷಣಾ ಮಂಡಳಿಯು ಸ್ಥಾಯಿ ಸಮಿತಿಗೆ ಮಾಹಿತಿ ನೀಡಿತು. 

ಹೀಗಾಗಿ, ಕೇಂದ್ರ ಅರಣ್ಯ ಸಚಿವರಾದ ತಾವು ಈ ವಿಚಾರದಲ್ಲಿ ಮಧ್ಯಪ್ರವೇಶ ಮಾಡಿ ಕರ್ನಾಟಕದ ಲಿಖಿತ ಮನವಿ ಬಗ್ಗೆ ಪ್ರಾಧಿಕಾರದ ಅಭಿಪ್ರಾಯವನ್ನು ಪರಿಶೀಲಿಸಿ ಆದಷ್ಟು ಬೇಗ ಯೋಜನೆಗೆ ಅನುಮತಿ ನೀಡಬೇಕು. ಕಳಸಾ ಯೋಜನೆಗೆ ಅಗತ್ಯವಿರುವ ಅನುಮತಿ ನೀಡಲು ರಿಜನಲ್ ಎಂಪವರ್ ಕಮಿಟಿ, ಇಂಟರ್ ಗ್ರೇಟೆಡ್ ರೀಜನಲ್ ಆಫೀಸ್, ಪರಿಸರ ಮತ್ತು ಅರಣ್ಯ ಇಲಾಖೆಯು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಲಾಗಿದೆ.