ಒಮಿಕ್ರಾನ್ ಸೋಂಕು ಉಲ್ಬಣ: ಇಂದು ಸಿಎಂ ನೇತೃತ್ವದಲ್ಲಿ ತಜ್ಞರ ಸಭೆ

ಒಮಿಕ್ರಾನ್ ಸೋಂಕು ಉಲ್ಬಣ: ಇಂದು ಸಿಎಂ ನೇತೃತ್ವದಲ್ಲಿ ತಜ್ಞರ ಸಭೆ

ಬೆಂಗಳೂರು: ರಾಜ್ಯದಲ್ಲಿ ಮಾರಕ ಕೊರೊನಾ ಹಾಗೂ ಅದರ ರೂಪಾಂತರಿ ಒಮಿಕ್ರಾನ್ ಸೋಂಕು ಹರಡುವಿಕೆ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ಎರಡೂ ವೈರಸ್‌ಗಳನ್ನು ಕಟ್ಟಿ ಹಾಕಲು ಸರ್ಕಾರ ಈಗಾಗಲೇ ಅಗತ್ಯ ಕ್ರಮ ಕೈಗೊಂಡಿದೆ. ಈ ಕುರಿತು ಮುಂದಿನ ರೂಪುರೇಷೆ ಹಾಗೂ ಮಾರ್ಗಸೂಚಿ ರಚನೆಗೆ ಸಲಹೆ ಪಡೆಯಲು ಇಂದು ಸಂಜೆ 6 ಗಂಟೆಗೆ ತಜ್ಞರೊಂದಿಗೆ ಸಭೆ ನಡೆಯಲಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾ ತಡೆಗೆ ಬೇಕಾದ ಕ್ರಮ ಕೈಗೊಳ್ಳಲು ಇಂದು ಸಂಜೆ 6 ಗಂಟೆಗೆ ತಜ್ಞರ ಜೊತೆಗೆ ಮಹತ್ವದ ಸಭೆ ನಡೆಸಲಾಗುತ್ತದೆ. ಸಭೆಯಲ್ಲಿ ಕೈಗೊಂಡ ಕ್ರಮಗಳ ಬಗ್ಗೆ ಗುರುವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ ಎಂದರು. ಕೊರೊನಾ, ಒಮಿಕ್ರಾನ್ ಎರಡನ್ನು ನಾವು ಗಮನಿಸಿದ್ದೇವೆ. ದೇಶದಲ್ಲಿ, ನೆರೆ ರಾಜ್ಯಗಳಲ್ಲಿ ಸೋಂಕು ವೇಗವಾಗಿ ಹರಡುತ್ತಿದೆ.ನಮಗೆ ಕೊರೊನಾ 2 ನೇ ಅಲೆ ಅನುಭವವಿದೆ. ಹೀಗಾಗಿ ಜನಜೀವನಕ್ಕೆ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು. ಜನರು ಕೂಡ ಕೊರೊನಾ ನಿಯಮಗಳನ್ನು ಪಾಲಿಸಬೇಕು ಎಂದರು.