ಧಾರವಾಡ: ಸೆ.5ರಿಂದ ಶಾಲೆಗಳಲ್ಲಿ ಸಂವಿಧಾನದ ಪ್ರಸ್ತಾವನೆ ಓದು ಕಡ್ಡಾಯ - ಸಚಿವ ಮಧು ಬಂಗಾರಪ್ಪ

ಧಾರವಾಡ: ಸೆ.5ರಿಂದ ಶಾಲೆಗಳಲ್ಲಿ ಸಂವಿಧಾನದ ಪ್ರಸ್ತಾವನೆ ಓದು ಕಡ್ಡಾಯ - ಸಚಿವ ಮಧು ಬಂಗಾರಪ್ಪ

ಧಾರವಾಡ: ರಾಜ್ಯದ ಎಲ್ಲ ಶಾಲೆಗಳಲ್ಲಿ ವಿದ್ಯಾರ್ಥಿಗಳು ಸಂವಿಧಾನದ ಪ್ರಸ್ತಾವನೆಯನ್ನು ಪ್ರತಿದಿನ ಕಡ್ಡಾಯವಾಗಿ ಓದುವ ಕಾರ್ಯಕ್ರಮ ಸೆ.5ರಿಂದ ಜಾರಿಯಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. 

ಧಾರವಾಡದಲ್ಲಿ ಮಾತನಾಡಿರುವ ಅವರು, ಇನ್ನೆರಡು ದಿನಗಳಲ್ಲಿ ಇದರ ಆದೇಶ ಹೊರಬೀಳಲಿದೆ. ದೇಶದಲ್ಲಿನ ಪ್ರಜೆಗಳೆಲ್ಲರೂ ಅನ್ಯೋನ್ಯವಾಗಿ ಬಾಳಲು ಸಂವಿಧಾನ ಅವಕಾಶ ಮಾಡಿಕೊಟ್ಟಿದೆ. ಸಂವಿಧಾನ ಪ್ರಸ್ತಾವನೆಯನ್ನು ಎಲ್ಲರೂ ಓದಿ ತಿಳಿದುಕೊಳ್ಳಬೇಕು ಎಂಬುದು ಈ ಕಾರ್ಯಕ್ರಮದ ಆಶಯ ಎಂದರು. 

ಜೊತೆಗೆ ಶಾಲಾ ಮತ್ತು ಸಾಕ್ಷರತಾ ಶಿಕ್ಷಣ ಇಲಾಖೆ ಹಾಗೂ ಅರಣ್ಯ ಇಲಾಖೆ ಸಹಯೋಗದಲ್ಲಿ ಈ ವರ್ಷ 50 ಲಕ್ಷ ಸಸಿಗಳನ್ನು ನೆಡಲು ತೀರ್ಮಾನಿಸಲಾಗಿದೆ. ಶಾಲೆಗಳಲ್ಲಿ ಮಕ್ಕಳು ಮಧ್ಯಾಹ್ನ ಬಿಸಿಯೂಟ ಸೇವನೆ ನಂತರ ಗಿಡದ ಬುಡದಲ್ಲಿ ಆ ತಟ್ಟೆ ತೊಳೆಯುವಂತೆ ಮಾಡಲು ಉದ್ದೇಶಿಸಿದ್ದೇವೆ. ವಿದ್ಯಾರ್ಥಿಗಳು ಕಲಿಕೆಯ ಜೊತೆಗೆ ಪರಿಸರ ಪ್ರೇಮ ಮೈಗೂಡಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. 

ಶಾಲಾ ಶಿಕ್ಷಣ ಇಲಾಖೆಯಲ್ಲಿ ಕೆಲವು ಸಮಸ್ಯೆಗಳು ಇವೆ. ಕೆಲವೆಡೆ ಶಾಲಾ ಕಟ್ಟಡ ಸಮಸ್ಯೆ, ಶಿಕ್ಷಕರ ಕೊರತೆ ಮೊದಲಾದ ಸಮಸ್ಯೆಗಳು ಇವೆ. ಇನ್ನು ಎರಡು ವರ್ಷಗಳಲ್ಲಿ ಈ ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದರು.