ದಸರಾ ಉದ್ಘಾಟಕರಾಗಿ ಎಸ್.ಎಂ.ಕೃಷ್ಣ ಆಯ್ಕೆ

ಬೆಂಗಳೂರು/ಮೈಸೂರು : ಮೈಸೂರು ದಸರಾ 2021ಕ್ಕೆ ತಯಾರಿ ಚುರುಕಾಗಿದೆ. ಈ ಬಾರಿಯ ದಸರಾವನ್ನು ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ದಸರಾ ಉದ್ಘಾಟಿಸಲಿದ್ದಾರೆ. ಈ ಕುರಿತು ಮಂಗಳವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಸ್. ಎಂ. ಕೃಷ್ಣ ಅವರನ್ನ ಹೆಸರನ್ನು ಅಂತಿಮಗೊಳಿಸಲಾಗಿದೆ. ಈ ಬಗ್ಗೆ ಸ್ವತಃ ಬೊಮ್ಮಾಯಿ ಅವರೇ ಟ್ವಿಟ್ಟರ್ ಮೂಲಕ ಮಾಹಿತಿ ನೀಡಿದ್ದಾರೆ. ಅಕ್ಟೋಬರ್ 7ರಿಂದ ಆರಂಭವಾಗಲಿರುವ ನಾಡಹಬ್ಬ ದಸರಾ ಮಹೋತ್ಸವವನ್ನು ಉದ್ಘಾಟಿಸಲು ಹಿರಿಯ ಮುತ್ಸದ್ಧಿ, ಮಾಜಿ ಮುಖ್ಯಮಂತ್ರಿ ಶ್ರೀ ಎಸ್. ಎಂ. ಕೃಷ್ಣ ರವರಿಗೆ ಆಹ್ವಾನ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿಗಳ ಅಧಿಕೃತ ಖಾತೆಯಿಂದ ಟ್ವೀಟ್ ಮಾಡಲಾಗಿದೆ. ಅಕ್ಟೋಬರ್ 7ರಿಂದ 15ರ ತನಕ ಈ ಬಾರಿಯ ಮೈಸೂರು ದಸರಾ ಮಹೋತ್ಸವ ನಡೆಯಲಿದೆ. ಕೋವಿಡ್ ಕಾರಣದಿಂದಾಗಿ ಸರಳವಾಗಿ ದಸರಾ ನಡೆಯಲಿದ್ದು, ಅಕ್ಟೋಬರ್ 15ರಂದು ಜಂಬೂ ಸವಾರಿ ಸಹ ಅರಮನೆ ಆವರಣದಲ್ಲಿ ಮಾತ್ರ ನಡೆಯಲಿದೆ.