ಜೂನ್ 14 ರಂದು ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ

ಜೂನ್ 14 ರಂದು ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ

ಧಾರವಾಡ: ಜೂನ್ 14 ರಂದು ಎಸ್ಸೆಸ್ಸೆಲ್ಸಿ ಪೂರಕ ಜರುಗಲಿದ್ದು, ಧಾರವಾಡ ಜಿಲ್ಲೆಯ 25 ಪರೀಕ್ಷಾ ಕೇಂದ್ರಗಳಲ್ಲಿ ಏಳು ತಾಲೂಕುಗಳ 7469 ವಿದ್ಯಾರ್ಥಿಗಳು ಈ ಪರೀಕ್ಷೆ ಬರೆಯಲಿದ್ದಾರೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ತಿಳಿಸಿದರು. ಅವರು ಇಂದು ಮಧ್ಯಾಹ್ನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಕುರಿತು ಪೂರ್ವಭಾವಿ ಸಭೆ ಜರುಗಿಸಿ ಅವರು ಮಾತನಾಡಿದರು. 

ಈ ಪರೀಕ್ಷೆಯನ್ನು ಶಿಸ್ತುಬದ್ಧವಾಗಿ ನಡೆಸಬೇಕು. ಯಾವುದೇ ರೀತಿಯ ಗೊಂದಲ, ನಕಲು ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಸಕಾಲಕ್ಕೆ ಪ್ರಶ್ನೆ ಪತ್ರಿಕೆಗಳು ಪರೀಕ್ಷಾ ಕೇಂದ್ರಕ್ಕೆ ತಲುಪುವಂತೆ ಜಾಗೃತಿ ವಹಿಸಬೇಕು ಎಂದು ಅವರು ಹೇಳಿದರು. 

ಶಾಲಾ ಮುಖ್ಯಸ್ಥರು ಹಾಗೂ ಪರೀಕ್ಷಾ ಕೇಂದ್ರಗಳ ನೋಡಲ್ ಅಧಿಕಾರಿಗಳು ಪರೀಕ್ಷಾ ಕೇಂದ್ರದಲ್ಲಿ ಸಿಸಿ ಟಿವಿ, ಪೊಲೀಸ್ ಕಾವಲು ಮತ್ತು ಶೌಚಾಲಯ, ಕುಡಿಯುವ ನೀರು ಸೇರಿದಂತೆ ಎಲ್ಲ ಸೌಕರ್ಯಗಳು ವ್ಯವಸ್ಥಿತವಾಗಿ ಇರುವಂತೆ ಮುಂಜಾಗೃತೆ ವಹಿಸಬೇಕು ಎಂದು ತಿಳಿಸಿದರು. 

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಜಿಲ್ಲೆಯ ಕೆಲವು ಶಾಲೆಗಳು ಶೇ.100 ರಷ್ಟು ಗುರಿ ಸಾಧನೆ ಮಾಡಿ, ಉತ್ತೀರ್ಣ ಫಲಿತಾಂಶ ನೀಡಿವೆ. ಇಂತಹ ಶಾಲೆಗಳ ಶಿಕ್ಷಕರನ್ನು, ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಅಗತ್ಯವಿದೆ. ಪ್ರಸಕ್ತ ವರ್ಷ ಧಾರವಾಡ ಜಿಲ್ಲೆ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಬರಬೇಕು. ಈ ಕುರಿತು ಶಿಕ್ಷಣ ಇಲಾಖೆಯೊಂದಿಗೆ ಪ್ರತಿ 15 ದಿನಗಳಿಗೊಮ್ಮೆ ಪ್ರಗತಿ ಪರಿಶೀಲನಾ ಸಭೆ ಜರುಗಿಸಲಾಗುವುದು. ಜಿಲ್ಲಾಡಳಿತವು ಶಿಕ್ಷಣ ಇಲಾಖೆ ಬೆಂಬಲಕ್ಕಿದ್ದು, ಅಗತ್ಯ ಬೇಡಿಕೆಗಳನ್ನು ಪೂರೈಸಲಾಗುವುದು. ಶಿಕ್ಷಣ ಇಲಾಖೆಯ ಅಧಿಕಾರಿಗಳು, ವಿಷಯ ಪರಿವೀಕ್ಷಕರು, ಶಾಲಾ ಮುಖ್ಯೋಪಾಧ್ಯಯರು, ಶಿಕ್ಷಕರು ಈ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಈಗಿನಿಂದಲೇ ಮಾಡಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದರು.